ವಿಜಯ ಸಿಂಧೂರ,ಗದಗ
ಪ್ರಸಕ್ತ ಸಾಲಿನ ಮುಂಗಾರು ಹಂಗಾಮುಆರಂಭವಾಗುತ್ತಿದ್ದು, ಯಾವುದೇ ರಸಗೊಬ್ಬರ ಮಾರಾಟಗಾರರು ನಿಗದಿಗಿಂತ ಹೆಚ್ಚಿನ ದರ ವಸೂಲಿ ಮಾಡಿದರೆ ಅಥವಾ ಕೃತಕ ಅಭಾವ ಸೃಷ್ಟಿಸಲು ಯತ್ನಿಸಿದರೆ ಅಂತಹವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ರೈತರು ಕೃಷಿ ಭೂಮಿಯಲ್ಲಿ ರಸಗೊಬ್ಬರಗಳನ್ನು ಅತಿಯಾಗಿ ಬಳಸದೇ ಮಣ್ಣಿನ ಆರೋಗ್ಯ ದೃಷ್ಟಿಯಿಂದ ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ಇತ್ತೀಚಿನ ದಿನಗಳಲ್ಲಿ ಮಣ್ಣಿನ ಪರೀಕ್ಷೆ ಮಾಡಿಸದೇ ರಸಗೊಬ್ಬರಗಳನ್ನು ವಿಶೇಷವಾಗಿ ಯೂರಿಯಾ ಮತ್ತು ಡಿ.ಎ.ಪಿ ಗೊಬ್ಬರಗಳನ್ನು ಅತಿಯಾಗಿ ಬಳಸುತ್ತಿರುವುದು ಕಂಡುಬರುತ್ತಿದೆ.ಇದರಿಂದ ಮಣ್ಣಿನ ಫಲವತ್ತತೆ ಕ್ಷೀಣಿಸುವುದಲ್ಲದೇ ಅನಗತ್ಯವಾಗಿ ಕೃಷಿ ವೆಚ್ಚವೂ ಹೆಚ್ಚಾಗುತ್ತಿದೆ. ರೈತರು ತಮ್ಮ ಜಮೀನಿನ ಮಣ್ಣು ಪರೀಕ್ಷಾ ವರದಿಯ ಆಧಾರದ ಮೇಲೆ ಕೃಷಿ ಅಧಿಕಾರಿಗಳ ಸಲಹೆಯಂತೆ ಶಿಫಾರಸ್ಸು ಮಾಡಿದ ಪ್ರಮಾಣದಲ್ಲಿಯೇ ರಸಗೊಬ್ಬರಗಳನ್ನು ನೀಡಬೇಕು. ಕೇವಲ ರಾಸಾಯನಿಕ ಗೊಬ್ಬರಗಳನ್ನೇ ಅವಲಂಬಿಸದೇ ತೇವಾಂಶ ಉಳಿಸಿಕೊಳ್ಳಲು ಮತ್ತು ಮಣ್ಣಿನ ಜೈವಿಕ ಗುಣಮಟ್ಟವನ್ನು ಹೆಚ್ಚಿಸಲು ಕೊಟ್ಟಿಗೆ ಗೊಬ್ಬರ, ಕಾಂಪೋಸ್ಟ್, ಹಸಿರು ಗೊಬ್ಬರ ಹಾಗೂ ಜೀವಾಮೃತದಂತಹ ನೈಸರ್ತಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಸಾಂಪ್ರದಾಯಿಕ ಮೂಟೆ ಯೂರಿಯಾ ಗೊಬ್ಬರದ ಬದಲಾಗಿ ದ್ರವರೂಪದ ನ್ಯಾನೋ ಯೂರಿಯಾವನ್ನು ಬಳಸುವುದರಿಂದ ಬೆಳೆಗೆ ಸಾರಜನಕದ ಲಭ್ಯತೆ ಹೆಚ್ಚುತ್ತದೆ ಮತ್ತು ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂದರು.
