ವಿಜಯ ಸಿಂಧೂರ, ರೋಣ
ಕ್ರಷಿ, ಕುಟುಂಬದ ನಿರ್ವಹಣೆಗಾಗಿ ಮಾಡಿದ ಸಾಲ ಭಾರವಾಗಿ, ಸಾಲದಿಂದ ಮುಕ್ತಿ ಸಾಧ್ಯವಿಲ್ಲ ಎಂದು ಮನನೊಂದು ಯುವ ರೈತ ನೇಣಿಗೆ ಶರಣಾದ ದುರ್ಘಟನೆ ತಾಲೂಕಿನ ಚಿಕ್ಕಮಣ್ಣೂರ ಗ್ರಾಮದಲ್ಲಿ ನಡೆದಿದೆ.

ಕಳೇದ ವರ್ಷದ ಅತಿವೃಷ್ಟಿ ಈ ಭಾರಿ ಸಕಾಲಕ್ಕೆ ಮಳೆಯಾಗದೆ ಬೆಳೆ ಕೈಕೊಟ್ಟಿದ್ದರಿಂದ
ಮನನೊಂದ ಯುವ ರೈತ ಸಾಲದ ಚಿಂತೆಯಿಂದ ಹೊರಬರಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರ ಗ್ರಾಮದ ಯುವ ರೈತ ಸಂತೋಷಗೌಡ ಪಾಟೀಲ (31) ಆತ್ಮಹತ್ಯೆ ಮಾಡಿಕೊಂಡವನು. ತಮ್ಮ 7 ಎಕರೆ ಜಮೀನಿನಲ್ಲಿ ಕೃಷಿ ನಂಬಿಕೊಂಡು ಜೀವನ ಸಾಗಿಸುತ್ತಿದ್ದರು.
ಸಾಲ ಭಾರವಾಯಿತು:
ಕೃಷಿ ಚಟುವಟಿಕೆಗಳಿಗಾಗಿ ಹಾಗೂ ಜೀವನ ನಿರ್ವಹಣೆಗೆ ಸಂತೋಷಗೌಡ ಅವರು ಸವಡಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ರೂ.2 ಲಕ್ಷ ಹಾಗೂ ರೋಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ರೂ. 5.60 ಲಕ್ಷ ಸೇರಿದಂತೆ ಒಟ್ಟು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು, ಬ್ಯಾಂಕಿನ ಸಾಲವನ್ನು ಮರುಪಾವತಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದರು. ಸಾಲಬಾಧೆಯಿಂದ ತೀವ್ರವಾಗಿ ಮನನೊಂದಿದ್ದ ಸಂತೋಷಗೌಡ, ರವಿವಾರ ಬೆಳಿಗ್ಗೆ ತಾವು ವಾಸಿಸುವ ಮನೆಯ ಮಹಡಿಯ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ತಾಯಿ ನೀಡಿದ ದೂರಿನನ್ವಯ ರೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ
